ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಒಪ್ಪಿಗೆ

ಬೆಂಗಳೂರು, ಅ. 10: ರಾಜ್ಯದಲ್ಲಿ ಏಳು ಹೊಸ ವಿಶ್ವವಿದ್ಯಾಲಯ ಸ್ಥಾಪನೆಯ ಕುರಿತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕಕ್ಕೆ ಸೋಮವಾರದಂದು ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ತಿದ್ದುಪಡಿಯ ಅನ್ವಯ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ ಜಿಲ್ಲೆಯಲ್ಲಿ ಹೊಸ ವಿಶ್ವವಿದ್ಯಾಲಯಗಳು ಆರಂಭವಾಗಲಿವೆ.
'ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಪ್ರತಿ ವಿಶ್ವ ವಿದ್ಯಾಲಯಕ್ಕೆ ತಲಾ 2ಕೋಟಿ ರೂ.ನಂತೆ ವಾರ್ಷಿಕವಾಗಿ 14 ಕೋಟಿ ರೂ.ನೀಡಲಾಗುತ್ತದೆ. ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ 18, ಹಾಸನ ವಿಶ್ವವಿದ್ಯಾಲಯದಲ್ಲಿ 36, ಹಾವೇರಿ ವಿಶ್ವವಿದ್ಯಾಲಯದಲ್ಲಿ 40, ಬೀದರ್ ವಿಶ್ವವಿದ್ಯಾಲಯದಲ್ಲಿ 140, ಕೊಡಗು ವಿಶ್ವವಿದ್ಯಾಲಯದಲ್ಲಿ 24, ಕೊಪ್ಪಳ ವಿಶ್ವವಿದ್ಯಾಲಯದಲ್ಲಿ 40 ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ 71 ಕಾಲೇಜುಗಳು ಬರಲಿವೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸಲಿವೆ' ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.