ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಕೃಷಿ ಪಂಪ್ಸೆಟ್ಗಳಿಗೆ 10 HP ವರೆಗೆ ಉಚಿತ ವಿದ್ಯುತ್

ಮಡಿಕೇರಿ : ರೈತರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, 10 HP ವರೆಗಿನ ಪಂಪ್ ಗಳಿಗೆ ಉಚಿತ ವಿದ್ಯುತ್ ನೀಡುತ್ತೇವೆ, ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಯೋಜನೆಯ ಫಲಾನುಭವಿಗಳ ಸಮ್ಮೇಳನದಲ್ಲಿ ಗಾಂಧಿ ಭವನ, ಗ್ರೇಟರ್ ರಾಜಸೀಟು, ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ರೈತರ ಕೃಷಿ ಪಂಪ್ಸೆಟ್ಗಳಿಗೆ 10 ಹೆಚ್ಪಿ ವರೆಗೆ ಉಚಿತವಾಗಿ ವಿದ್ಯುತ್ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಫಲಾನುಭವಿಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ 1,13,132 ಮನೆಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಜಿಲ್ಲೆಯಲ್ಲಿ 12 ಸಮುದಾಯ ಭವನ ನಿರ್ಮಾಣಕ್ಕೆ 2.2 ಕೋಟಿ ರೂ. ಬಿಡುಗಡೆ ಮಾಡಿದೆ. ಹಾಗೆಯೇ ಕೊಡವ ಸಮಾಜಗಳ ಒಕ್ಕೂಟಕ್ಕೆ ರೂ. 10 ಕೋಟಿ ಸರ್ಕಾರದಿಂದ ಬಿಡುಗಡೆ ಮಾಡಿದೆ. ಜಿಲ್ಲೆಯ 343 ಗ್ರಾಮಗಳಲ್ಲಿ ಸರ್ಕಾರಿ ಜಮೀನು ಗುರುತಿಸಿ ಸ್ಮಶಾನಕ್ಕಾಗಿ ಭೂಮಿ ಕಾಯ್ದಿರಿಸಲಾಗಿದೆ. ಜೊತೆಗೆ ಬೆಂಗಳೂರಿನಲ್ಲಿ ಕೊಡವ ಸಮಾಜದ ಒಕ್ಕೂಟಕ್ಕೆ 7 ಎಕರೆ ಭೂಮಿಯನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಸರ್ಕಾರ ಕೊಡಗು ಜಿಲ್ಲೆಗೆ ರಸ್ತೆ ಅಭಿವೃದ್ಧಿಗೆ 100 ಕೋಟಿ ರೂ. ವಿಶೇಷ ಪ್ಯಾಕೆಜ್ ಪ್ರಕಟಿಸಿದೆ. ಹಾಗೆಯೇ ಮೈಸೂರು ಕುಶಾಲನಗರ ಚತುಷ್ಪಥ ಹೆದ್ದಾರಿ ಅಭಿವೃದ್ಧಿಗೆ ಪ್ರಧಾನಮಂತ್ರಿ ಅವರು ಈಗಾಗಲೇ ಚಾಲನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ರಾಜ್ಯದ ಪ್ರಗತಿಗೆ ಶ್ರೀಸಾಮಾನ್ಯ ಬಡವರಿಗೆ ಉತ್ತಮ ಕಾರ್ಯಕ್ರಮಗಳನ್ನು ನೀಡುವ ಮೂಲಕ ಸರ್ಕಾರ ಎಲ್ಲಾ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಶ್ರೀಸಾಮಾನ್ಯರ ಬದುಕು ಬದಲಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. 30 ರಿಂದ 50 ಸಾವಿರ ಕುಟುಂಬಗಳ ಫಲಾನುಭವಿಗಳಿಗೆ ಒಂದಲ್ಲ ಒಂದು ಯೋಜನೆಗಳು ತಲುಪಿವೆ ಎಂದು ಮುಖ್ಯಮಂತ್ರಿ ಅವರು ವಿವರಿಸಿದರು.
ಸರ್ಕಾರ ಎಲ್ಲರಲ್ಲೂ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಿದೆ. ನಾಡನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ನೆಚ್ಚಿನ ಪ್ರಧಾನಮಂತ್ರಿ ಅವರು ದೇಶದ ಸುರಕ್ಷತೆಗೆ, ಭದ್ರತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಮೂಲಭೂತ ಸೌಕರ್ಯ ಹಾಗೂ ಸಾಮಾಜಿಕ ನ್ಯಾಯ ಎಲ್ಲರಿಗೂ ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಅವರು ನುಡಿದರು.