ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಸಿಎಂ ಬೊಮ್ಮಾಯಿ

ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ಅವರು ಪರಿಣಾಮ ಬಿರಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿದವಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ.ಹೇಗೆ ಮಾಡಬೇಕು ಎಂದು ನಿರ್ಧಾರ ಆಗಿಲ್ಲ. ಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದೆ ಎಂದು ಹೇಳಿದರು.
ಕಾಂಗ್ರೆಸ್ ನವರು ಹತಾಶರಾಗಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ನಾನು ಮಹಿಳೆಯರಿಗೆ ವಿಶೇಷ ಯೋಜನೆ ಜಾರಿಗೆ ತರುತ್ತೇನೆ ಎಂದು ಘೋಷಣೆ ಮಾಡಿದ್ದೆ, ಅದೇ ರೀತಿ ಅವರು ಹತಾಶ ಭಾವನೆಯಿಂದ ಯೋಜನೆ ಘೋಷಣೆ ಮಾಡಿದ್ದಾರೆ. ರಾಜ್ಯದ ಜನರು ಅದನ್ನು ಒಪ್ಪುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇವೆ . ಕಾರ್ಯಕಾರಿಣಿ ಮುಗಿದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.