ಧಾರವಾಡ: ಬಡವರಿಗೆ ಮನೆ ಹಸ್ತಾಂತರ ಮಾಡಿ

ಧಾರವಾಡ: ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ನಿರ್ಮಾಣವಾಗಿರುವ ಆಶ್ರಯ ಮನೆಗಳನ್ನು ಶೀಘ್ರ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಧಾರವಾಡದ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ 1600 ಮನೆಗಳು, ಲಕಮನಹಳ್ಳಿ, ರಾಜೀವಗಾಂಧಿನಗರದಲ್ಲಿ 1070 ಮನೆಗಳು ನಿರ್ಮಾಣವಾಗಿವೆ. ಆದರೆ, ಕಳೆದ ಮೂರು ವರ್ಷಗಳಿಂದ ಅರ್ಹ ಫಲಾನುಭವಿಗಳಿಗೆ ಮನೆಗಳು ಹಂಚಿಕೆಯಾಗದೇ ಆ ಮನೆಗಳು ಇದೀಗ ಹಾಳಾಗುತ್ತಿವೆ.
ಕಳೆದ 7 ವರ್ಷಗಳ ಹಿಂದೆ 125 ಕೋಟಿ ರೂಪಾಯಿ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವುದಾಗಿ ಹೇಳುತ್ತಲೇ ಬರಲಾಗುತ್ತಿದೆ. ಆದರೆ, ಇದುವರೆಗೂ ಮನೆ ಹಂಚಿಕೆಯಾಗಿಲ್ಲ. ಶಾಸಕರು ತಮಗೆ ಬೇಕಾದವರಿಗೆ ಮನೆ ಹಂಚಿಕೆ ಮಾಡುವ ಸಲುವಾಗಿ ಈ ರೀತಿ ವಿಳಂಬ ಮಾಡುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಒಂದು ತಿಂಗಳ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡದೇ ಹೋದಲ್ಲಿ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಸಿದರು.