ಮುತಾಲಿಕ್ ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧೆ : ಸಚಿವ ಸುನೀಲ್ ಕುಮಾರ್ ವಾಗ್ದಾಳಿ

ಮುತಾಲಿಕ್ ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧೆ : ಸಚಿವ ಸುನೀಲ್ ಕುಮಾರ್ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ.

ಮುತಾಲಿಕ್ ಸ್ಪರ್ಧೆ ಕುರಿತಂತೆ ಹಾಲಿ ಕ್ಷೇತ್ರದ ಶಾಸಕ, ಇಂಧನ ಸಚಿವ ಈ ಕುರಿತು ಟ್ವೀಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು.

ಅದೀಗ ನಿಜವಾಗಿದೆ !ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದಿದ್ದಾರೆ.

ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ' ವೋಟು, ನೋಟು' ಹೇಳಿಕೆಯ ಮೂಲಕ ತಿಳಿಸಿದ್ದಿರಿ ಎಂದು ಹೇಳಿದ್ದಾರೆ.

ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮ‌ಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ' ತನು- ಮನ-ಧನ' - ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.